
ಮೈಸೂರು: ಪಕ್ಷದ ಹೈಕಮಾಂಡ್ ತೀರ್ಮಾನದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಅವರ ನಡೆ ನಿಜಕ್ಕೂ ಎಲ್ಲರಿಗೂ ಮಾದರಿಯಾಗಿದೆ. ಅವರು ನಮ್ಮ ಪ್ರಶ್ನಾತೀತ ನಾಯಕರು ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಶುಕ್ರವಾರ ಮೈಸೂರಿನ ಖಾಸಗಿ ಹೋಟೆಲ್ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಬದಲಾವಣೆ ಇದೊಂದು ಪ್ರಕ್ರಿಯೆ. ಹೈಕಮಾಂಡ್ ತೀರ್ಮಾನದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಈ ಹಿಂದೆಯೂ ಅವರು ನಾನು ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದರು. ಅದರಂತೆ ನಡೆದುಕೊಂಡಿದ್ದಾರೆ. ಅವರ ನಡೆ ನಿಜಕ್ಕೂ ಮಾದರಿ ಎಂದು ಹೇಳಿದರು.
ಹೊಸ ಸಚಿವ ಸಂಪುಟದಲ್ಲಿ ಸೇರ್ಪಡೆ ಕುರಿತು ಪ್ರತಿಕ್ರಿಯಿಸಿ, ರಾಜಕೀಯದಲ್ಲಿ ಯಾವುದೂ ಪರ್ಮನೆಂಟ್ ಅಲ್ಲ, ಸದ್ಯಕ್ಕೆ ಆ ಚರ್ಚೆ ಅನಗತ್ಯ, ಮೊದಲು ಶಾಸಕಾಂಗ ಪಕ್ಷದ ಸಭೆ ಬಳಿಕ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆನಂತರ ಬೇರೆ ವಿಚಾರ. ಬಹುತೇಕ ಡಿ. ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದರು.
ಎಷ್ಟು ಡಿಸಿಎಂ ಸ್ಥಾನವಿರಬೇಕು ಎಂಬುದರ ಬಗ್ಗೆ ಇನ್ನೂ ಯಾವುದೇ ಚರ್ಚೆಗೆ ಬಂದಿಲ್ಲ. ಉಪ ಮುಖ್ಯಮಂತ್ರಿ ಸ್ಥಾನ ಹಾಗೂ ಸಚಿವರ ಬಗ್ಗೆ ಸಿಎಂ ಹಾಗೂ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.
ದಲಿತರಿಗೆ ಸಿಎಂ ಸ್ಥಾನ ಕೊಡಬೇಕು ಎಂದು ಎಪ್ಪತ್ತು ವರ್ಷದಿಂದ ಹೋರಾಟ ಮಾಡುತ್ತಿದ್ದಾರೆ. ಆದರೆ, ಕೊಟ್ಟಿಲ್ಲ. ಅವಕಾಶ ಇದ್ದರೂ ಕೊಡುತ್ತಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಏನೇನು ಆಗಬೇಕೋ ಅದು ಆಗುತ್ತದೆ. ಮುಖ್ಯವಾಗಿ ನಾವು ಜನರ ಪರವಾಗಿ ಕೆಲಸ ಮಾಡಬೇಕು. ಅವರ ಏಳಿಗೆಗೋಸ್ಕರ ಎಲ್ಲ ರೀತಿಯ ಕಾರ್ಯಕ್ರಮ ಕೊಟ್ಟಿರುವುದೇ ಕಾಂಗ್ರೆಸ್. ಕಾಂಗ್ರೆಸ್ನ ರಾಷ್ಟಿçÃಯ ಅಧ್ಯಕ್ಷರೇ ಮಲ್ಲಿಕಾರ್ಜುನ ಖರ್ಗೆಯವರು ಎಂದರು.
ಈ ವೇಳೆ ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್, ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ್ ಮತ್ತಿತರರು ಹಾಜರಿದ್ದರು.