
ಮೈಸೂರು; ಮಾಜಿ ಸಂಸದ ವಿ.ಎಸ್. ಉಗ್ರಪ್ಪರವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಬೇಕೆಂದು ವಾಲ್ಮೀಕಿ ನಾಯಕ ಸಂಘಗಳ ಒಕ್ಕೂಟದ ಅಧ್ಯಕ್ಷ ದ್ಯಾವಪ್ಪ ನಾಯಕ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿ.ಎಸ್. ಉಗ್ರಪ್ಪ ಅವರು, ಸುಮಾರು 35 ವರ್ಷಗಳಿಂದ ಸಕ್ರಿಯವಾಗಿ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದು, ವಿಧಾನ ಪರಿಷತ್ ಸದಸ್ಯರಾಗಿ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ದಕ್ಷತೆಯಿಂದ, ಪ್ರಾಮಾಣಿಕತೆಯಿಂದ ಜನಪರವಾಗಿ ಧ್ವನಿಯೆತ್ತಿದ್ದರು. ನಾಯಕ ಹಾಗೂ ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ಸಮಿತಿಯ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಮಹಿಳೆಯ ಮತ್ತು ಮಕ್ಕಳ ಮೇಲೆ ದೌರ್ಜನ್ಯ ತಡೆಗಟ್ಟುವ ಬಗ್ಗೆ ಹಲವಾರು ಯೋಜನೆಗಳನ್ನು ತಂದ ಕೀರ್ತಿ ಇವರಿಗೆ ಸಲ್ಲುತ್ತದೆ. ಹಾಗೂ ಅಲ್ಪಾವಧಿಯಲ್ಲಿ ಲೋಕಸಭಾ ಸದಸ್ಯರಾಗಿ ಸಮರ್ಥವಾಗಿ ಕೆಲಸ ನಿರ್ವಹಿಸಿದ್ದಾರೆ. ಇಂತಹ ಸಮಾಜಮುಖಿ ಚಿಂತನೆಯುಳ್ಳ ಉಗ್ರಪ್ಪ ಅವರನ್ನು ರಾಜ್ಯಸಭಾ ಸದಸ್ಯರಾಗಿ ನೇಮಕ ಮಾಡಿದರೆ, ರಾಜ್ಯಸಭೆಯಲ್ಲಿ ಪಕ್ಷದ ಪರವಾಗಿ ದಕ್ಷತೆಯಿಂದ ಎದುರಾಳಿಗಳಿಗೆ ಉತ್ತರ ನೀಡಲು ಅನುಕೂಲ ಆಗುತ್ತದೆ. ಹಾಗೂ ಪಕ್ಷ ಸಂಘಟನೆಗೆ ಅನುಕೂಲ ಆಗುತ್ತದೆ ಆದ್ದರಿಂದ ವಿ ಎಸ್ ಉಗ್ರಪ್ಪ ಅವರನ್ನು ರಾಜ್ಯ ಸಭಾ ಸದಸ್ಯರನ್ನಾಗಿ ನೇಮಕ ಮಾಡಬೇಕೆಂದು ಆಗ್ರಹಿಸಿದ್ದಾರೆ.