
*ವಿವಿಧ ಸಂಘ, ಸಂಸ್ಥೆಗಳಿAದ ಗಿಡಗಳನ್ನು ನೆಟ್ಟು ಪರಿಸರ ದಿನಾಚರಣೆ
ಪರಿಸರ ಉಳಿಸಿದರೆ ನೈಸರ್ಗಿಕ ಗಾಳಿಯಿಂದ ಆರೋಗ್ಯಕ್ಕೆ ಸಹಕಾರಿ: ಶಾಸಕ ಜಿಟಿಡಿ
ಮೈಸೂರು: ಅರಮನೆ ನಗರಿ ಮೈಸೂರಿನ ವಿವಿಧೆಡೆ ವಿವಿಧ ಸಂಘ, ಸಂಸ್ಥೆಗಳಿAದ ಗಿಡನೆಟ್ಟು ಪರಿಸರ ದಿನಾಚರಣೆಯನ್ನು ಆಚರಿಸುವ ಮೂಲಕ ಪರಿಸರ ಉಳಿವು, ಅದರ ಸಂರಕ್ಷಣೆಯ ಮಹತ್ವವನ್ನು ಸಾರಲಾಯಿತು. ಮೈಸೂರಿನ ರಾಮಕೃಷ್ಣನಗರ ಎಚ್.ಬ್ಲಾಕ್ನ ಆರೋಗ್ಯ ಬಡಾವಣೆ ಉದ್ಯಾನವನದಲ್ಲಿ ಮೈಸೂರು ಮಹಾನಗರಪಾಲಿಕೆ ಹಾಗೂ ಅರಣ್ಯ ಇಲಾಖೆ ವತಿಯಿಂದ ವಿಶ್ವಪರಿಸರ ದಿನದ ಅಂಗವಾಗಿ ಆಯೋಜಿಸಿದ್ದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ,
ಪರಿಸರ ಉಳಿಸಿದರೆ ನೈಸರ್ಗಿಕ ಗಾಳಿಯಿಂದ ಆರೋಗ್ಯಕ್ಕೆ ಸಹಕಾರಿಯಾಗಲಿದೆ. ನಾವು ಮರ-ಗಿಡಗಳನ್ನು ನಾಶ ಮಾಡದೆ ಪ್ರಕೃತಿ ಉಳಿಸಿಕೊಳ್ಳಬೇಕು. ಮುಂದಿನ ಪೀಳಿಗೆಗೆ ನಾವು ಏನಾದರೂ ಕೊಡುಗೆ ನೀಡುವಂತಹ ಕೆಲಸ ಮಾಡಿದರೆ ಉತ್ತಮವಾಗಲಿದೆ. ಖಾಲಿ ಜಾಗದಲ್ಲಿ ಒಂದು ಸಸಿ ನೆಟ್ಟರೆ ಒಂದು ಜೀವಕ್ಕೆ ಗಾಳಿ ದೊರೆಯಲಿದೆ ಎಂದು ಸಲಹೆ ನೀಡಿದರು.
ಬದಲಾದ ಕಾಲಕ್ಕೆ ತಕ್ಕಂತೆ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕಾದರೂ ನಮ್ಮಲ್ಲಿನ ನೈಸರ್ಗಿಕ ಸಂಪತ್ತು,ಕಾಡು, ಗಿಡಗಳನ್ನು ಉಳಿಸಿಕೊಳ್ಳಬೇಕು. ಮರಗಳನ್ನು ಉಳಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಮಹಾರಾಜರ ಕಾಲದಿಂದ ಉಳಿಸಿಕೊಂಡು ಬಂದಿರುವ ಸೌಂದರ್ಯವನ್ನು ಹಾಗೆಯೇ ಉಳಿಸಿಕೊಳ್ಳಬೇಕು. ನಗರಪಾಲಿಕೆಯ ಹಲವಾರು ಉದ್ಯಾನವನಗಳಲ್ಲಿ ಗಿಡಗಳನ್ನು ನೆಟ್ಟು ಸುಂದರವನವನ್ನಾಗಿ ಮಾಡುವುದು ಎಲ್ಲರ ಕರ್ತವ್ಯ. ನಗರಪಾಲಿಕೆ ವತಿಯಂದ 15ಸಾವಿರ ಗಿಡಗಳನ್ನು ಏಕಕಾಲದಲ್ಲಿ ನೆಡುವ ತೀರ್ಮಾನ ಮಾಡಿ ಸಿಬ್ಬಂದಿ,ಪೌರ ಕಾರ್ಮಿಕರಿಗೆ ನೆಡುವುದಕ್ಕೆ ಆಯುಕ್ತರು ಕಟ್ಟುನಿಟ್ಟಿನ ಸೂಚನೆ ನೀಡಿರುವುದನ್ನು ಎಲ್ಲರೂ ಪಾಲಿಸಬೇಕು ಎಂದರು.ಅರಣ್ಯ ಇಲಾಖೆ ವತಿಯಿಂದ ಸಸಿಗಳನ್ನು ನೆಡುವುದು ಮುಖ್ಯ. ಅದೇ ರೀತಿ ಬೆಳೆದು ಅಪಾಯದಲ್ಲಿರುವ ಮರಗಳನ್ನು ಕಡಿದು ಪ್ರಾಣಾಪಾಯ ಆಗದಂತೆ ನೋಡಿಕೊಳ್ಳುವುದು ಮುಖ್ಯ. ಕಾಡು ಉಳಿಸುವುದು ಎಲ್ಲರ ಜವಾಬ್ದಾರಿಯಾಗಿದ್ದು, ಕೆಲವರು ಕಾನೂನು ಮೀರಿ ಮರಗಳನ್ನು ಕಡಿದು ಅಪಾಯಕ್ಕೆ ಸಿಲುಕುತ್ತಾರೆ.ಆದ್ದರಿಂದ ಅಧಿಕಾರಿಗಳು ಕಾಲಕಾಲಕ್ಕೆ ಅಪಾಯದಲ್ಲಿರುವ ಮರಗಳನ್ನು ಕಡಿದು ಸಾಗಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷಿ÷್ಮÃಕಾಂತ್ ರೆಡ್ಡಿ, ನಗರಪಾಲಿಕೆ ಆಯುಕ್ತ ಶೇಖರ್ ತನ್ವೀರ್ ಆಸಿಫ್, ಅರಣ್ಯ ಸಂರಕ್ಷಣಾಧಿಕಾರಿ ಸಿ.ರವಿಶಂಕರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಜಿ.ಪರಮೇಶ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಾಗರಾಜ ಸಿದ್ದಪ್ಪ ಅಂಕಸದೊಡ್ಡಿ,ಮೈಸೂರು ವಕೀಲರ ಸಂಘದ ಅಧ್ಯಕ್ಷ ಎಸ್.ಲೋಕೇಶ್ ಮತ್ತಿತರರು ಹಾಜರಿದ್ದರು.