
ಮೈಸೂರು; ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಸಮಾಜದಲ್ಲಿ ಜಾಗೃತಿ ಮೂಡಿಸುವುದು ಮತ್ತು ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ನಾಗರಾಜು ಎಸ್. ಅಂಕಸದೊಡ್ಡಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್ ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಪೊಲೀಸ್ ಇಲಾಖೆ ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಮಕ್ಕಳ ಸಹಾಯವಾಣಿ 1098 ಹಾಗೂ ಸ್ವಯಂಸೇವಾ ಸಂಸ್ಥೆಗಳು, ಮೈಸೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಮಹಾರಾಜ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೃಷ್ಣರಾಜ ಸಭಾಮಂಟಪದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನ ಆಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,
ಸಮಾಜದ ಕಣ್ಣಿಗೆ ಬೀಳದಂತೆ ಎಲ್ಲೋ ಒಂದು ಕಡೆ ಬಾಲಕಾರ್ಮಿಕರನ್ನು ಬಲವಂತವಾಗಿ ದುಡಿಸಿಕೊಳ್ಳಲಾಗುತ್ತಿದೆ. ಆದರೆ ಇಂತಹ ವಿಷಯಗಳು ಯಾವುದೋ ಒಂದು ಮೂಲೆಯಿಂದ ನಮ್ಮ ಗಮನಕ್ಕೆ ಬಂದೇ ಬರುತ್ತವೆ. ಅಂತಹ ಸಂದರ್ಭಗಳಲ್ಲಿ ಸಾರ್ವಜನಿಕರು ತಕ್ಷಣವೇ ಸಂಬAಧಪಟ್ಟ ಇಲಾಖೆಗೆ ಮಾಹಿತಿ ನೀಡಬೇಕು. ಇದರಿಂದ ಆ ಮಗುವಿಗೆ ಸುಂದರ ಹಾಗೂ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಾಯವಾಗುತ್ತದೆ ಎಂದು ತಿಳಿಸಿದರು.
ಮಕ್ಕಳು ದೇಶದ ಭವಿಷ್ಯ ಅವರ ಕೈಯಲ್ಲಿ ಪುಸ್ತಕ ಇರಬೇಕೇ ಹೊರತು, ಉಪಕರಣಗಳಲ್ಲ . ಬಾಲಕಾರ್ಮಿಕ ಪದ್ಧತಿಗೆ ಕಾರಣಗಳು ಮತ್ತು ಪರಿಣಾಮಗಳು ಮಕ್ಕಳು ಶಿಕ್ಷಣವನ್ನು ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಆದರೆ ಇಂದಿನ ಪರಿಸ್ಥಿತಿಯಲ್ಲಿ ಅನೇಕ ಮಕ್ಕಳು ಶಿಕ್ಷಣದಿಂದ ವಂಚಿತರಾಗಿ ದುಡಿಮೆಯಲ್ಲಿ ತೊಡಗಿರುವುದು ವಿಷಾದನೀಯ ಎಂದು ಹೇಳಿದರು.
ಬಡತನ ಮತ್ತು ಅಜ್ಞಾನ, ಸಾಮಾಜಿಕ ಅಸಮಾನತೆ, ಶಿಕ್ಷಣದ ಕೊರತೆ ಬಾಲಕಾರ್ಮಿಕ ಪದ್ಧತಿಯು ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವುದಷ್ಟೇ ಅಲ್ಲದೆ, ಅವರ ದೈಹಿಕ, ಮಾನಸಿಕ ಮತ್ತು ಬೌದ್ಧಿಕ ಬೆಳವಣಿಗೆಯ ಮೇಲೆಯೂ ಗಂಭೀರ ಪರಿಣಾಮ ಬೀರುತ್ತದೆ. ಕೇವಲ ಕಾನೂನಿನಿಂದ ಬದಲಾವಣೆ ಸಾಧ್ಯವಿಲ್ಲ, ಭಾರತದ ಸಂವಿಧಾನವು ಮಕ್ಕಳ ಹಕ್ಕುಗಳನ್ನು ಸಂರಕ್ಷಿಸಿದೆ. 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಅಪಾಯಕಾರಿ ಹಾಗೂ ವಾಣಿಜ್ಯ ಚಟುವಟಿಕೆಗಳಲ್ಲಿ ದುಡಿಸುವುದನ್ನು ಕಾನೂನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಕೇವಲ ಕಾನೂನುಗಳಿಂದಲೇ ಈ ಸಮಸ್ಯೆಗೆ ಸಂಪೂರ್ಣ ಪರಿಹಾರ ಸಿಗುವುದಿಲ್ಲ. ಸಮಾಜದ ಪ್ರತಿಯೊಬ್ಬ ನಾಗರಿಕನೂ ತನ್ನ ಜವಾಬ್ದಾರಿಯನ್ನು ಅರಿತುಕೊಂಡು ಶ್ರಮಿಸಿದಾಗ ಮಾತ್ರ ಈ ಪಿಡುಗನ್ನು ತೊಲಗಿಸಲು ಸಾಧ್ಯ ಎಂದು ಹೇಳಿದರು.
ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ರವಿಚಂದ್ರ ಮಾತನಾಡಿ, ಮಕ್ಕಳು ದುಡಿಯುವುದು ದೇಶದ ವಿಕಾಸಕ್ಕೆ ಪೂರಕವಲ್ಲ, ಬದಲಿಗೆ ಮಾರಕ .ಯಾವುದೇ ಭಾಗದಲ್ಲಿ ಬಾಲಕಾರ್ಮಿಕರು ಕಂಡುಬAದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಗೆ ಕರೆ ಮಾಡಿ ಮಾಹಿತಿ ನೀಡಿ ಎಂದರು.
ಭಾರತದ ಸುಮಾರು 140 ಕೋಟಿಗೂ ಅಧಿಕ ಜನಸಂಖ್ಯೆಯಲ್ಲಿ, ಅಂದಾಜು 27 ಕೋಟಿ ಮಕ್ಕಳು ಇಂದಿಗೂ ಬಾಲಕಾರ್ಮಿಕರಾಗಿ ದುಡಿಯುತ್ತಿದ್ದಾರೆ ಎಂಬುದು ಆಘಾತಕಾರಿ ಎಂದರು.
ಕಾರ್ಯಕ್ರಮದಲ್ಲಿ ಸಹಾಯಕ ಕಾರ್ಮಿಕ ಆಯುಕ್ತರಾದ ಲಲಿತಾಬಾಯಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ವಕೀಲ ಸುಂದರ್ ರಾಜ್.ಎನ್, ಮಕ್ಕಳ ರಕ್ಷಣಾಧಿಕಾರಿ ಆಶಾ, ಪೀಪಲ್ಸ್ ಪಾರ್ಕ್ ಶಾಲೆಯ ಮುಖ್ಯೋಪಾಧ್ಯಾಯ ಜಾನ್, ಎಸಿಪಿ ಮಹಮ್ಮದ್ ಶರೀಫ್, ಜಿಲ್ಲಾ ಕಾರ್ಮಿಕ ಅಧಿಕಾರಿ ಚೇತನ್ ಕುಮಾರ್, ಮಹಾರಾಜ ಕಾಲೇಜಿನ ಪ್ರಾಂಶುಪಾಲ ಉದಯಶಂಕರ್, ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ನಿರ್ದೇಶಕರಾದ ಮಲ್ಲಿಕಾರ್ಜುನ ಹೆಚ್. ಸಿ. ಮತ್ತು ಡಾನ್ ಬಾಸ್ಕೋ ಸಂಸ್ಥೆಯ ಜೆಮ್ ಜೋಶ್ ಮತ್ತಿತರರು ಉಪಸ್ಥಿತರಿದ್ದರು.