
ಮೈಸೂರು: ಸಮರ್ಥನಂ ಟ್ರಸ್ಟ್ ಫಾರ್ ದಿ ಡಿಸೇಬಲ್ಡ್ ಹಾಗೂ ಐ.ಐ.ಎಫ್.ಎಲ್. ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ, ಸಿ.ಎಸ್.ಆರ್. ಯೋಜನೆಯಡಿ ಮೈಸೂರಿನ ಇಲವಾಲದ ಕರ್ನಾಟಕ ಪಬ್ಲಿಕ್ ಶಾಲೆಗೆ ಮಿನಿ ವಿಜ್ಞಾನ ಪ್ರಯೋಗಾಲಯ, ಡಿಜಿಟಲ್ ಸ್ಮಾರ್ಟ್ ಬೋರ್ಡ್ ಹಾಗೂ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಿಟ್ಗಳನ್ನು ಕೊಡುಗೆಯಾಗಿ ನೀಡಿ ಶಾಲೆಯ ಶೈಕ್ಷಣಿಕ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಲಾಯಿತು.
ಕಾರ್ಯಕ್ರಮದ ಶಾಲೆಯ ಪ್ರಭಾರ ಉಪಪ್ರಾಂಶುಪಾಲ ಶಂಕರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಮರ್ಥನಂ ಟ್ರಸ್ಟ್ ಹಾಗೂ ಐ.ಐ.ಎಫ್.ಎಲ್. ಫೌಂಡೇಶನ್ ವತಿಯಿಂದ ದೊರೆತಿರುವ ಮಿನಿ ವಿಜ್ಞಾನ ಪ್ರಯೋಗಾಲಯ ಮತ್ತು ಡಿಜಿಟಲ್ ಸ್ಮಾರ್ಟ್ ಬೋರ್ಡ್ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಸೃಜನಶೀಲತೆ ಹಾಗೂ ಸಂಶೋಧನಾ ಮನೋವೃತ್ತಿಯನ್ನು ಬೆಳೆಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು ಹಾಗೂ ಭವಿಷ್ಯದಲ್ಲಿ ವಿಜ್ಞಾನಿಗಳಾಗಿ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಸಮರ್ಥನಂ ಟ್ರಸ್ಟ್ನ ಶಿಕ್ಷಣ ವಿಭಾಗದ ಮುಖ್ಯಸ್ಥ ಗುರುರಾಘವೇಂದ್ರ , ತಾವು ಸಹ ಸರ್ಕಾರಿ ಶಾಲೆಯ ವಿದ್ಯಾರ್ಥಿಯಾಗಿದ್ದು, ಸರ್ಕಾರಿ ಶಾಲೆಗಳ ಮಹತ್ವವನ್ನು ಮನಗಂಡು ಅವುಗಳನ್ನು ಸದೃಢಗೊಳಿಸುವ ಜವಾಬ್ದಾರಿ ಸಮಾಜದ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಶಿಕ್ಷಣಕ್ಕೆ ಅತ್ಯಂತ ಮಹತ್ವವಿದ್ದು, ವಿದ್ಯಾರ್ಥಿಗಳು ಡಿಜಿಟಲ್ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಂಡು ತಮ್ಮ ಜ್ಞಾನ ಹಾಗೂ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಬೇಕು ಎಂದು ಹೇಳಿದರು.
ಐ.ಐ.ಎಫ್.ಎಲ್. ಸಂಸ್ಥೆಯ ಸೇಲ್ಸ್ ವಿಭಾಗೀಯ ವ್ಯವಸ್ಥಾಪಕ ಟಿ.ಸಿ. ಶಿವಕುಮಾರ್ ಮಾತನಾಡಿ, ಸಂಸ್ಥೆಯ ಸಿ.ಎಸ್.ಆರ್. ಕಾರ್ಯಕ್ರಮದಡಿ ಸರ್ಕಾರಿ ಶಾಲೆಗಳಿಗೆ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುವುದು ಹೆಮ್ಮೆಯ ವಿಷಯವಾಗಿದೆ. ಶಾಲೆಗೆ ನೀಡಿರುವ ಮಿನಿ ವಿಜ್ಞಾನ ಪ್ರಯೋಗಾಲಯ ಹಾಗೂ ಡಿಜಿಟಲ್ ಸ್ಮಾರ್ಟ್ ಬೋರ್ಡ್ ಅನ್ನು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಂಡು ಶಿಕ್ಷಣದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಪ್ರಾಂಶುಪಾಲ ಕುಮಾರ್ ಮಾತನಾಡಿ, ಡಿಜಿಟಲ್ ಸ್ಮಾರ್ಟ್ ಬೋರ್ಡ್ ಒಂದರಿAದ ಹತ್ತನೇ ತರಗತಿಯವರೆಗಿನ ಸಂಪೂರ್ಣ ಪಠ್ಯಕ್ರಮವನ್ನು ಒಳಗೊಂಡಿರುವುದರಿAದ ಬೋಧನೆ ಮತ್ತು ಕಲಿಕೆಯ ಪ್ರಕ್ರಿಯೆ ಹೆಚ್ಚು ಪರಿಣಾಮಕಾರಿಯಾಗಲಿದೆ ಎಂದರು. ಇಂತಹ ಆಧುನಿಕ ತಂತ್ರಜ್ಞಾನ ಆಧಾರಿತ ಶೈಕ್ಷಣಿಕ ಸೌಲಭ್ಯಗಳು ಸರ್ಕಾರಿ ಶಾಲೆಗಳ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತವೆ ಎಂದು ತಿಳಿಸಿ, ಈ ಅಮೂಲ್ಯ ಕೊಡುಗೆಗಾಗಿ ಸಮರ್ಥನಂ ಟ್ರಸ್ಟ್ ಹಾಗೂ ಐ.ಐ.ಎಫ್.ಎಲ್. ಫೌಂಡೇಶನ್ಗೆ ಕೃತಜ್ಞತೆ ಸಲ್ಲಿಸಿದರು.
ಐ.ಐ.ಎಫ್.ಎಲ್. ಸಂಸ್ಥೆಯ ಮ್ಯಾನೇಜರ್ ಕನಕಲತಾ ಮಾತನಾಡಿ, ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಶೈಕ್ಷಣಿಕ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಹಿರಿಯ ಶಿಕ್ಷಕರಾದ ಪೂರ್ಣಿಮಾ, ಶಿವಕುಮಾರ್, ಸಮರ್ಥನಂ ಟ್ರಸ್ಟ್ನ ಲೋಕೇಶ್ ಕುಮಾರ್, ಶಿವರಾಜು, ಸುರೇಂದ್ರ ಕುಮಾರ್, ಶಾಲೆಯ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.