
ಮೈಸೂರು; ಕನ್ನಡ ಸಾಹಿತ್ಯ ಲೋಕದ ಅಪ್ರತಿಮ ಕವಿ, ರಾಷ್ಟç ಕವಿ ಜಿ.ಎಸ್. ಶಿವರುದ್ರಪ್ಪ ಅವರ ಸಾಹಿತ್ಯ, ಕಾವ್ಯ ಮತ್ತು ಕನ್ನಡ ಭಾಷೆಗೆ ಸಲ್ಲಿಸಿದ ಅಮೂಲ್ಯ ಕೊಡುಗೆಯನ್ನು ಸ್ಮರಿಸುವ ಉದ್ದೇಶದಿಂದ ವಿಜಯ ವಿಠ್ಠಲ ಪದವಿ ಪೂರ್ವ ಕಾಲೇಜಿನಲ್ಲಿ ಜಿ.ಎಸ್. ಶಿವರುದ್ರಪ್ಪ – ಕವಿ ಕಾವ್ಯ ನಮನ ಕರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಬಿ. ಬಾಲಕೃಷ್ಣಯ್ಯ, ಕವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಜಿ.ಎಸ್. ಶಿವರುದ್ರಪ್ಪ ಅವರು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಮಹಾನ್ ಕವಿ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಅವರ ಕೃತಿಗಳು ಮಾನವೀಯ ಮೌಲ್ಯಗಳು, ಪ್ರಕೃತಿ ಪ್ರೇಮ, ದೇಶಭಕ್ತಿ ಮತ್ತು ಜೀವನದ ತಾತ್ವಿಕತೆಯನ್ನು ಪ್ರತಿಬಿಂಬಿಸುತ್ತವೆ ಎಂದು ತಿಳಿಸಿದರು.
ಸಮನ್ವಯ ಕವಿ ಎಂದು ಖ್ಯಾತರಾಗಿದ್ದ ಅವರು ಹಲವಾರು ಗೇಯಗುಣ ಸಂಪನ್ನವಾದ ಭಾವಗೀತೆಗಳನ್ನು ರಚಿಸಿ ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ. ಜಿ.ಎಸ್.ಎಸ್. ಅವರು ಕುವೆಂಪು ಅವರ ಮಾರ್ಗದರ್ಶನದಲ್ಲಿ “ಸೌಂದರ್ಯ ಸಮೀಕ್ಷೆ” ಎಂಬ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿಯನ್ನು ಪಡೆದರು. ಅವರ ಸಾಹಿತ್ಯ ಇಂದಿನ ಯುವಜನತೆಗೆ ಪ್ರೇರಣೆಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಚಾರ್ಯ ಎಚ್. ಸತ್ಯಪ್ರಸಾದ್ ಮಾತನಾಡಿ, ಕವಿಗಳು ತಮ್ಮ ಕೃತಿಗಳ ಮೂಲಕ ಎಲ್ಲಾ ಕಾಲಕ್ಕೂ ಜೀವಂತರಾಗಿರುತ್ತಾರೆ. ಸಾಹಿತ್ಯಾಧ್ಯಯನವು ಏಕಾಗ್ರತೆಯನ್ನು ಹೆಚ್ಚಿಸಿ ಸಾಧನೆಗೆ ಪ್ರೇರಣೆ ನೀಡುತ್ತದೆ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿ.ಎಸ್.ಎಸ್. ವಿರಚಿತ ಭಾವಗೀತೆಗಳನ್ನು ವಿದ್ಯಾರ್ಥಿನಿಯರು ಶುಶ್ರಾವ್ಯವಾಗಿ ಹಾಡಿದರು.
ಕಾರ್ಯಕ್ರಮದಲ್ಲಿ ಕಾರ್ಣಿಕ, ಕವನ, ವರ್ಷ, ಶಿವಾನಿ, ಉಪನ್ಯಾಸಕರಾದ ಮಯೂರಲಕ್ಷಿö್ಮ ಮತ್ತು ಅನ್ನಪೂರ್ಣ ರಾವ್ ಉಪಸ್ಥಿತರಿದ್ದರು.