
ಮೈಸೂರು: ರಾಜ್ಯ ಸರ್ಕಾರ ಕಳೆದ ಎರಡು ತಿಂಗಳಲ್ಲಿ ತಮಿಳುನಾಡಿಗೆ ಎಲ್ಲಾ ನೀರನ್ನು ಹರಿಸಿದ ಬಳಿಕ ಈಗ ಸರ್ವಪಕ್ಷಗಳ ಸಭೆ ಕರೆಯುತ್ತಿರುವುದರಿಂದ ಆಗುವ ಪ್ರಯೋಜನವಾದರೂ ಏನು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದರು.
ಶುಕ್ರವಾರ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಭಾಗದ ಜಲಾಶಯಗಳಲ್ಲಿ ನೀರಿಲ್ಲ. ಇದ್ದ ಅಲ್ಪ ಸ್ವಲ್ಪ ನೀರನ್ನೂ ಕೂಡ ತಮಿಳುನಾಡಿಗೆ ಈಗಾಗಲೇ ಹರಿಸಿದ್ದಾರೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲೇ ನೀರಿನ ಮುನ್ನೆಚ್ಚರಿಕೆ ವಹಿಸಿ, ಜಲಾಶಯಗಳಲ್ಲಿ ನೀರನ್ನು ಹಿಡಿದಿಟ್ಟುಕೊಳ್ಳುವ ಕೆಲಸ ಮಾಡಬೇಕಿತ್ತು. ಆದರೆ ಸರ್ಕಾರ ಆ ಬಗ್ಗೆ ಯಾವುದೇ ಗಮನ ಹರಿಸಲಿಲ್ಲ. ಅಧಿಕಾರದ ಕುರ್ಚಿ ಜಗ್ಗಾಟ ಮತ್ತು ಆಂತರಿಕ ರಾಜಕೀಯದಲ್ಲೇ ಮುಳುಗಿದ್ದ ರಾಜ್ಯ ಸರ್ಕಾರಕ್ಕೆ, ಕಾವೇರಿ ನೀರಿನ ಬಗ್ಗೆ ಯೋಚನೆಯೇ ಬರಲಿಲ್ಲ. ಇದ್ದ ನೀರನ್ನೆಲ್ಲಾ ತಮಿಳುನಾಡಿಗೆ ಹರಿಸಿ ಈಗ ಕೃತಕ ಸಂಕಷ್ಟ ಸೃಷ್ಟಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.
ಎಲ್ಲಾ ನೀರು ಕೈಜಾರಿ ಹೋದ ಮೇಲೆ ವಿರೋಧ ಪಕ್ಷಗಳ ಸಲಹೆ ಪಡೆಯುವುದರಿಂದ ಯಾವ ಉಪಯೋಗವೂ ಇಲ್ಲ ಎಂದು ಕಿಡಿ ಕಾರಿದರು.
ಸಿಎಂ ಡಿ.ಕೆ.ಶಿವಕುಮಾರ್ ಅವರು ಸಚಿವ ಸಂಪುಟ ವಿಸ್ತರಣೆ ಮತ್ತು ತಮ್ಮ ಕುರ್ಚಿ ಉಳಿಸಿಕೊಳ್ಳುವ ರಾಜಕಾರಣದಲ್ಲೇ ಸಮಯ ವ್ಯರ್ಥ ಮಾಡುತ್ತಿದ್ದಾರೆ. ಕಾವೇರಿ ವಿಚಾರದಲ್ಲಿ ಕಾನೂನು ಹೋರಾಟ ನಡೆಸಲು ವಕೀಲರನ್ನು ಭೇಟಿ ಮಾಡಲು ಅವರಿಗೆ ಸಮಯ ಸಿಗುತ್ತಿಲ್ಲ ಎಂದು ಆಪಾದಿಸಿದರು.
ಸಂಕಷ್ಟದಲ್ಲಿರುವ ರಾಜ್ಯದ ರೈತರ ಹಿತರಕ್ಷಣೆಗೆ ಬಿಜೆಪಿ ಸದಾಕಾಲವೂ ಬದ್ಧವಾಗಿದ್ದು, ಅವರ ಪರವಾಗಿ ಹೋರಾಟ ಮುಂದುವರಿಸಲಿದೆ ಎಂದು ತಿಳಿಸಿದರು. ಈ ವೇಳೆ ಬಿಜೆಪಿ ಮೈಸೂರು ಗ್ರಾಮಾಂತರ ಮಾಜಿ ಜಿಲ್ಲಾಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಮತ್ತಿತರರು ಹಾಜರಿದ್ದರು.