
ಪಿರಿಯಾಪಟ್ಟಣ: ಬರದ ಹಿನ್ನೆಲೆಯಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು, ಮೇವಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಶಾಸಕ ಕೆ.ವೆಂಕಟೇಶ್ ತಿಳಿಸಿದರು.
ತಾಲೂಕಿನ ಈಚೂರು, ಬಾರಸೆ, ಆಯಿತನಹಳ್ಳಿ, ಸೀಗೂರು ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರಿಸಿ ಮಾತನಾಡಿದ ಅವರು ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಬಾರದ ಹಿನ್ನೆಲೆಯಲ್ಲಿ ಹಾರಂಗಿ ನಾಲೆಯಿಂದ 150 ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ ಈ ನೀರನ್ನು ಜನ ಮತ್ತು ಜಾನುವಾರುಗಳಿಗೆ ಕುಡಿಯಲು ಮಾತ್ರ ಬಿಡಲಾಗುತ್ತಿದ್ದು, ಸಾರ್ವಜನಿಕರು ಹಾಗೂ ರೈತರು ವ್ಯವಸಾಯಕ್ಕೆ ಬಳಸಬಾರದು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮಗಳಲ್ಲಿ ಕುಡಿಯುವ ನೀರು, ನೈರ್ಮಲ್ಯ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯಾಗದ ರೀತಿಯಲ್ಲಿ ಕ್ರಮ ವಹಿಸುವಂತೆ ಸೂಚಿಸಿದ ಅವರು, ಗ್ರಾಮಗಳಲ್ಲಿ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಜಲ ಜೀವನ್ ಮಿಷನ್ ಯೋಜನೆಯಡಿ ಮನೆಮನೆಗೂ ನೀರಿನ ಸಂಪರ್ಕ ಒದಗಿಸಲಾಗುತ್ತಿದೆ, ಅಲ್ಲದೆ ಗ್ರಾಮಗಳ ಪ್ರಮುಖ ಸಂಪರ್ಕ ರಸ್ತೆಯ ಬಳಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ಸ್ಥಳ ಪರಿಶೀಲನೆ ನಡೆಸಲಾಗುತ್ತಿದೆ ಅಲ್ಲಿಯ ವರೆಗೂ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ತಕ್ಷಣ ಪರಿಹಾರ ಕಾರ್ಯಕೈಗೊಳ್ಳಬೇಕು, ತಾಲ್ಲೂಕಿನ ಯಾವುದೇ ಗ್ರಾಮದಲ್ಲೂ ಜನ ಕುಡಿಯುವ ನೀರಿನ ಸಮಸ್ಯೆ ಎಂದು ದೂರು ತೋರಬಾರದು ಕೂಡಲೇ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ಪಟ್ಟಿ ಮಾಡಿ ಎಂದರು. ತಾಲೂಕಿನಲ್ಲಿ ಕಂದಾಯ, ಅಬಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮುಜುರಾಯಿ, ನಗರ ಮತ್ತು ಪುರಸಭೆ, ಶಿಕ್ಷಣ ಇಲಾಖೆ , ನೀರಾವರಿ ಇಲಾಖೆಯ ಅಧಿಕಾರಿಗಳು ಯಾರ ಮುಲಾಜಿಗೂ ಬಗ್ಗದೆ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು ಎಂದು ಹೇಳಿದರು
ಈ ಸಂದರ್ಭದಲ್ಲಿ ಗ್ರಾಮಸ್ಥರು ರಸ್ತೆ, ಚರಂಡಿ, ಕುಡಿಯುವ ನೀರು, ವಿದ್ಯುತ್ ಸೌಲಭ್ಯ, ಜಮೀನಿಗೆ ರಸ್ತೆ, ದೇವಸ್ಥಾನಗಳು ಹಾಗೂ ಸಮುದಾಯ ಭವನಕ್ಕೆ ಅನುದಾನಕ್ಕೆ ಸಂಬಂಧಿಸಿದಂತೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ನಿಸರ್ಗ ಪ್ರಿಯಾ, ತಾಪಂ ಇಒ ಸುನಿಲ್ ಕುಮಾರ್, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಈಚೂರು ಲೋಕೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ
ಗ್ರಾಮಸ್ಥರು ಉಪಸ್ಥಿತರಿದ್ದರು.