
*7 ದಿನದೊಳಗೆ ತನಿಖಾ ವರದಿ ನೀಡಲು ಸೂಚನೆ
ಹನೂರು; ತಾಲೂಕಿನ ಕಾವೇರಿ ವನ್ಯ ಜೀವಿ ಧಾಮದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿಯಾದ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ಡಿಸಿ ಆದೇಶ ತನಿಖೆಗೆ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಕೊಳ್ಳೇಗಾಲ ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ನೇತೃತ್ವದಲ್ಲಿ ತನಿಖೆ ನಡೆಸಿ 7 ದಿನದೊಳಗಾಗಿ ವರದಿ ನೀಡಲು ಆದೇಶಿಸಿದ್ದಾರೆ. ಇನ್ನು ಘಟನೆ ಬಗ್ಗೆ ಹನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಸಿ ದಿನೇಶ್ ಕುಮಾರ್ ಮೀನಾ , ಚಾಮರಾಜನಗರ ಜಿಲ್ಲಾಧಿಕಾರಿ ತನಿಖೆಗೆ ಆದೇಶಿಸಿದ್ದು, ಈಗಾಗಲೇ ತನಿಖೆ ಆರಂಭವಾಗಿದೆ. ನಿಗದಿತ ಅವಧಿಯೊಳಗೆ ತನಿಖೆ ನಡೆಸಿ ವರದಿ ಸಲ್ಲಿಸಲಾಗುತ್ತದೆ. ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದೇನೆ. ಗುಂಡೇಟಿಗೆ ಬಲಿಯಾದವರ ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಂಪೂರ್ಣ ತನಿಖಾ ವರದಿ ಸಲ್ಲಿಸಲಾಗುತ್ತದೆ ಎಂದು ಹೇಳಿದರು.
ಹನೂರಿನಲ್ಲೇ ಮೊಕ್ಕಾಂ ಹೂಡಿರುವ ಐಜಿಪಿ: ದಕ್ಷಿಣ ವಲಯ ಐಜಿಪಿ ಡಾ.ಬೋರಲಿಂಗಯ್ಯ ಅವರು ಹನೂರಿನಲ್ಲೇ ಮೊಕ್ಕಾಂ ಹೂಡಿದ್ದು, ನಿನ್ನೆಯಿಂದಲೂ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಜೊತೆಗೆ, ತನಿಖಾ ತಂಡಗಳ ಜೊತೆ ಸಭೆ ನಡೆಸುತ್ತಿದ್ದಾರೆ. ಇಂದು ಹನೂರಿನ ಪ್ರವಾಸಿ ಮಂದಿರದಲ್ಲಿ ತನಿಖಾಧಿಕಾರಿಯಾದ ಉಪವಿಭಾಗಧಿಕಾರಿ ದಿನೇಶ್ ಕುಮಾರ್ ಮೀನಾ, ಚಾಮರಾಜನಗರ ಎಸ್ಪಿ ಮುತ್ತುರಾಜ್, ಮೈಸೂರು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರೊಂದಿಗೆ ಸಭೆ ನಡೆಸಿ ಘಟನೆಯ ಬಗ್ಗೆ ವಿವರ ಸಂಗ್ರಹಿಸಿದ್ದಾರೆ.
ವಾಹನ ಸಂಚಾರ ಪುನಾರಂಭ: ಮಲೆಮಹದೇಶ್ವರ ಬೆಟ್ಟ ರಸ್ತೆ ಹಾದುಹೋಗುವ ಹನೂರು ಪಟ್ಟಣ ಠಾಣೆ ಮುಂದಿನ ರಸ್ತೆಯಲ್ಲೇ ಧರಣಿ ನಡೆಸುತ್ತಿರುವುದರಿಂದ ನಿನ್ನೆಯಿಂದಲೂ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಇಂದು ಬೆಳಗ್ಗೆ 5 ರಿಂದ ಪ್ರತಿಭಟನಾಕಾರರ ಮನವೊಲಿಸಿ ರಸ್ತೆಯ ಒಂದು ಬದಿಯಲ್ಲಿ ವಾಹನ ಸಂಚಾರಕ್ಕೆ ಪೊಲೀಸರು ಅನುವು ಮಾಡಿಕೊಟ್ಟಿದ್ದಾರೆ.
ಸ್ಥಳದಲ್ಲೇ ಎಸ್ಪಿ ಮುತ್ತರಾಜ್ ಹಾಗೂ ಎಎಸ್ಪಿ ಶಶಿಧರ್ ಮೊಕ್ಕಾಂ ಹೂಡಿದ್ದು, ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಭದ್ರತೆ ಕೈಗೊಳ್ಳಲಾಗಿದೆ.