
ಪಿರಿಯಾಪಟ್ಟಣ: ತಾಲ್ಲೂಕಿನ ಪಂಚವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಗ್ರಾ.ಪಂ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿ, ಸಾರ್ವಜನಿಕರಿಗೆ ದೊರೆಯುತ್ತಿರುವ ಸರ್ಕಾರಿ ಸೌಲಭ್ಯಗಳು, ಗ್ರಾಮದಲ್ಲಿನ ಮೂಲಭೂತ ಸಮಸ್ಯೆಗಳ ಕುರಿತು ಸಭೆಯಲ್ಲಿ ವಿವರವಾಗಿ ಚರ್ಚಿಸಲಾಯಿತು.
ಕಾರ್ಯಕ್ರಮದಲ್ಲಿ ಸಾಮಾಜಿಕ ಪರಿಶೋಧನಾ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಸಿ.ಆರ್.ಯೋಗೀಶ್ ಮಾತನಾಡಿ ಈ ಹಿಂದೆ ಇದ್ದ ಎಂಜಿ ನರೇಗಾ ಬದಲಿಗೆ ಕೇಂದ್ರ ಸರ್ಕಾರ ಜಾರಿಗೆ ವಿಕಸಿತ ಭಾರತ–ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ವಿಬಿಜಿ ರಾಮ್ ಜಿ) ಎಂದು ಬದಲಿಸಿ ಅದು 2026 ಜುಲೈ 1 ರಿಂದ ಅನುಷ್ಠಾನಕ್ಕೆ ಬಂದಿದ್ದು, ಈ ಹೊಸ ಕಾಯ್ದೆಯು, ಗ್ರಾಮೀಣ ಕುಟುಂಬಗಳಿಗೆ 100 ದಿನಗಳ ಬದಲಾಗಿ ವರ್ಷಕ್ಕೆ ಗರಿಷ್ಠ 125 ದಿನಗಳ ಉದ್ಯೋಗ ಖಾತರಿ ನೀಡಲಾಗಿದ್ದು, ಯಾವುದೇ ಅರ್ಹ ಗ್ರಾಮೀಣ ಕಾರ್ಮಿಕ ಒಂದು ದಿನವೂ ಕೆಲಸವಿಲ್ಲದೆ ಉಳಿಯದಂತೆ ನೋಡಿಕೊಳ್ಳುವುದು ಸರ್ಕಾರದ ಆದ್ಯತೆಯಾಗಿದ್ದು, ‘ಸಮೃದ್ಧ ಗ್ರಾಮಗಳ ಮೂಲಕ ವಿಕಸಿತ ಭಾರತವನ್ನು ನಿರ್ಮಿಸುವ ನಿಟ್ಟಿನಲ್ಲಿ ವಿಬಿ-ಜಿ ರಾಮ್ ಜಿ ಕಾಯ್ದೆಯ ಒಂದು ಐತಿಹಾಸಿಕ ಹೆಜ್ಜೆಯಾಗಿದೆ. ರೈತರು ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಕೃಷಿ ಹೊಂಡ, ಎರೆಹುಳು ತೊಟ್ಟಿ, ರೇಷ್ಮೆ ನಾಟಿ, ಟ್ರಂಚಿಂಗ್, ಮಂಚಿಂಗ್ನಂಥ ಕಾಮಗಾರಿಗಳನ್ನು ಮತ್ತು ಹೆನುಗಾರಿಕೆಗೆ ಸಂಬಂಧಿಸಿದ ಕೊಟ್ಟಿಗೆಗಳನ್ನು ನಿರ್ಮಾಣ ಮಾಡಲು ನರೇಗಾದಲ್ಲಿ ಸಾಕಷ್ಟು ಅವಕಾಶಗಳಿವೆ. ರೈತರು ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಟಿ.ಆರ್.ಶಿಲ್ಪ ಶ್ರೀ ಮಾತನಾಡಿ ಗ್ರಾಮ ಪಂಚಾಯತಿಗಳು ಗ್ರಾಮಗಳ ಸರ್ಕಾರ ಇಲ್ಲಿ ರೈತರಿಗೆ, ಬಡವರಿಗೆ, ನರೇಗಾ ಯೋಜನೆಗಳ ಮೂಲಕ ಅಗತ್ಯ ಸಹಕಾರ ನೀಡಲಾಗುವುದು ಇನ್ನುಳಿದಂತೆ ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆ ಮತ್ತು ಬೀದಿ ದೀಪಗಳ ನಿರ್ವಹಣೆ ಹಾಗೂ ನೈರ್ಮಲ್ಯಕ್ಕೆ ಪ್ರಥಮ ಆಧ್ಯತೆ ನೀಡಲಾಗುವುದು ಜೊತೆಗೆ ಮೂಲಭೂತ ಸೌಕರ್ಯಗಳಿಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಲು ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಆದಿಯಾಗಿ ಎಲ್ಲರೂ ಸಿದ್ಧರಿದ್ದೇವೆ ಆದ್ದರಿಂದ ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಮಾತನಾಡಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗುತ್ತಿದ್ದು, ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ತಿಳಿಸಿದರು.
ವಿವಿಧ ಯೋಜನೆಗಳ ಅನುಷ್ಠಾನ, ಫಲಾನುಭವಿಗಳಿಗೆ ತಲುಪುತ್ತಿರುವ ಸೌಲಭ್ಯ, ಕಾಮಗಾರಿಗಳ ಪ್ರಗತಿ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ ಪಡೆಯಲಾಯಿತು.
ಈ ಸಂದರ್ಭದಲ್ಲಿ ಪಿ.ಆರ್.ಇ.ಡಿ. ಸಹಾಯಕ ಅಭಿಯಂತರೆ ಪವಿತ್ರ, ನೋಡೆಲ್ ಅಧಿಕಾರಿ ಶಂಕರ್ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಸೈಯದ್ ರಫೀಕ್, ಗೋವಿಂದರಾಜು ಮುಖಂಡರಾದ ರವಿ, ಶರವಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.