
ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ
ಪಿರಿಯಾಪಟ್ಟಣ: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದು ಅತ್ಯವಶ್ಯಕ ಎಂದು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ತಿಳಿಸಿದರು.
ಪಟ್ಟಣದ ಗೋಣಿಕೊಪ್ಪಲು ರಸ್ತೆಯ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಧರ್ಮ ಪ್ರವರ್ತಕ ಬೆಂಗಳೂರು ಸುಬ್ಬಣ್ಣನವರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ನೇತೃತ್ವದಲ್ಲಿ ಆಯೋಜಿಸಿದ್ದ ಕಸಬಾ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಮಕ್ಕಳ ಆಸಕ್ತಿಯನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಬೇಕು. ಮೊದಲನೆಯದಾಗಿ ಗ್ರಾಮೀಣ ಕ್ರೀಡೆಗಳಿಗೆ ಆದ್ಯತೆ ನೀಡಬೇಕು. ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳು ಉತ್ತಮ ಸಾಧನೆ ಮಾಡುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಮಿಂಚಬೇಕು. ಶಿಕ್ಷಣದ ಜತೆಗೆ ಕ್ರೀಡೆ ಅಗತ್ಯ. ಉತ್ತಮ ಆರೋಗ್ಯವಿರುವ ದೇಹದಲ್ಲಿ ಆರೋಗ್ಯಕರ ಮನಸ್ಸು ಇರುತ್ತದೆ, ಗೆಲುವು ಜವಾಬ್ದಾರಿ ಹೆಚ್ಚಿಸುತ್ತದೆ, ಸೋಲು ಹಿಂದಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಮಾರ್ಗದರ್ಶನ ನೀಡುತ್ತದೆ. ಮಕ್ಕಳು ಸ್ನೇಹ ಪೂರ್ವಕವಾಗಿ ಕ್ರೀಡೆಗಳಲ್ಲಿ ಭಾಗವಹಿಸಬೇಕು,
ಕ್ರೀಡೆಯನ್ನು ಕ್ರೀಡೆಯಾಗಿ ಸ್ವೀಕರಿಸಿ. ತೀರ್ಪುಗಾರರು ನೀಡುವ ತೀರ್ಪು ಗೌರವಿಸಿ. ಎರಡು ದಿನ ಸಂಭ್ರಮದಿಂದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಸಾಧಕರಾಗಿ ಶಾಲೆಗಳಿಗೆ ತೆರಳಿ ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಕ ಕುಮಾರಸ್ವಾಮಿ, ಬಿಆರ್ಸಿ ಶಿವರಾಜ್, ಸರ್ಕಾರಿ ಜೂನಿಯರ್ ಕಾಲೇಜು ಪ್ರಾಂಶುಪಾಲ ದಿನೇಶ್, ಉಪ ಪ್ರಾಂಶುಪಾಲ ರವಿಚಂದ್ರ, ನವೋದಯ ನಾರಾಯಣ್, ದೈಹಿಕ ಶಿಕ್ಷಕರಾದ ಲಕ್ಷ್ಮಣ್ ತಳವಾರ, ದೇವರಾಜ್, ಎಸ್ಡಿಎಂಸಿ ಅಧ್ಯಕ್ಷ ಕುಮಾರ್ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರುಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.