
ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ ಶೀಘ್ರದಲ್ಲೇ ನಿವೇಶನ ಹಂಚಿಕೆ
ಕೆ.ಆರ್.ನಗರ : ಕೆ.ಆರ್.ನಗರದಲ್ಲಿ ೬.೫೦ ಕೋಟಿ ರೂ ವೆಚ್ಚದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.
೨ ದಿನಗಳ ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಅವರು, ಮಂಗಳವಾರ ಕೆ.ಆರ್.ನಗರಕ್ಕೆ ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿ. ಕೆ.ಆರ್. ನಗರದಲ್ಲಿ ಅಂಬೇಡ್ಕರ್ ಭವನದ ನಿರ್ಮಾಣದ ಕುರಿತು ಸ್ಥಳೀಯರಿಗಿದ್ದ ಗೊಂದಲಗಳನ್ನು ಪರಿಹರಿಸಿದರು.
ಬಳಿಕ ಮಾತನಾಡಿದ ಅವರು, ೬.೫೦ ಕೋಟಿ ರೂಪಾಯಿಗಳ ಅಂದಾಜು ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಲಾಗುತ್ತಿದೆ. ಹೆಚ್ಚಿನ ಅನುದಾನಕ್ಕಾಗಿ ಸ್ಥಳೀಯ ಶಾಸಕ ಡಿ. ರವಿಶಂಕರ್ ಅವರು, ಈ ಹಿಂದೆಯೇ ಬೇಡಿಕೆ ಇಟ್ಟಿದ್ದಾರೆ. ಅದರಂತೆ ಹೆಚ್ಚುವರಿ ಅನುದಾನದ ಅಗತ್ಯವಿದ್ದರೆ ಖಂಡಿತವಾಗಿಯೂ ಅನುದಾನ ನೀಡುವುದಾಗಿ ಈಗಾಗಲೇ ಭರವಸೆ ನೀಡಲಾಗಿದೆ. ಗುತ್ತಿಗೆದಾರರ ಜೊತೆಗೂ ಈ ವಿಷಯವಾಗಿ ಚರ್ಚೆ ನಡೆಸಿದ್ದು, ಶೀಘ್ರದಲ್ಲೇ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚಿಸಿದ್ದೇನೆ ಎಂದು ಸ್ಥಳೀಯರಿಗೆ ಮನವರಿಕೆ ಮಾಡಿಕೊಟ್ಟರು.
ಇದೇ ವೇಳೆ ನಗರದಲ್ಲಿರುವ ಅಂಬೇಡ್ಕರ್ ಪ್ರತಿಮೆಯನ್ನು ಬದಲಾಯಿಸುವಂತೆ ಸ್ಥಳೀಯರು ಇಟ್ಟ ಬೇಡಿಕೆಗೆ ಸ್ಪಂದಿಸಿದ ಉಪಮುಖ್ಯಮಂತ್ರಿಗಳು, ಈ ಹಿಂದೆ ಕೆ.ಆರ್.ನಗರಕ್ಕೆ ಭೇಟಿ ನೀಡಿದ್ದಾಗಲೇ ಈ ಬಗ್ಗೆ ಸೂಚಿಸಿದ್ದೆ. ಅದರಂತೆ ಈಗಾಗಲೇ ಶಾಸಕರು ಆದೇಶವನ್ನು ಹೊರಡಿಸಿದ್ದಾರೆ. ಸ್ಥಳವನ್ನು ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಅಧಿಕಾರಿಗಳಿಗೂ ಸೂಚನೆಯನ್ನು ನೀಡಿದ್ದೇನೆ. ಮುಂದಿನ ಮೂರು ತಿಂಗಳುಗಳ ಒಳಗಾಗಿ ಹೊಸದಾಗಿ ಅಂಬೇಡ್ಕರ್ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದರು.
ಸರ್ಕಾರದಿಂದ ನಿವೇಶನಗಳನ್ನು ಹಂಚಿಕೆ ಮಾಡುವಂತೆ ಕ್ಷೇತ್ರದ ಜನರು ಅರ್ಜಿಗಳನ್ನು ನೀಡಿ ಮಾಡಿದ ಮನವಿಗೆ ಸ್ಪಂದಿಸಿದ ಅವರು, ಈ ಬಗ್ಗೆ ನಾನು ಈಗಾಗಲೇ ಮುಖ್ಯಮಂತ್ರಿಗಳೊAದಿಗೆ ಚರ್ಚಿಸಿದ್ದೇನೆ. ರಾಜ್ಯದ ಪ್ರತಿ ಕ್ಷೇತ್ರಗಳಲ್ಲಿ ಬಡವರಿಗೆ ೪ ರಿಂದ ೫ ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಬೇಕೆಂದು ನಿರ್ಧರಿಸಲಾಗಿದೆ. ಅದರಂತೆ ಕೆ.ಆರ್.ನಗರ ಕ್ಷೇತ್ರದಲ್ಲೂ ಗ್ರಾಮ ಸಭೆಗಳ ಮೂಲಕ ಅರ್ಹ ಫಲಾನುಭವಿಗಳನ್ನು ಗುರುತಿಸಿ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.
ಈ ವೇಳೆ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಶಾಸಕ ರವಿಶಂಕರ್, ಜಿಲ್ಲಾಧಿಕಾರಿ ಲಕ್ಷಿ÷್ಮÃಕಾಂತ್ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ, ಕೆ.ಆರ್.ನಗರ ತಹಶೀಲ್ದಾರರು ಹಾಗೂ ಇತರರು ಉಪಸ್ಥಿತರಿದ್ದರು.