
ದೊಡ್ಡಕಮರಹಳ್ಳಿ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ
ಪಿರಿಯಾಪಟ್ಟಣ : ಶಿಕ್ಷಕರು ನೀಡುವ ಶಿಕ್ಷಣ, ಸಂಸ್ಕಾರ ಹಾಗೂ ಮಾರ್ಗದರ್ಶನವು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎಂದು ಪಿರಿಯಾಪಟ್ಟಣ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನಿಕಟ ಪೂರ್ವ ಅಧ್ಯಕ್ಷ ಗೊರಹಳ್ಳಿ ಜಗದೀಶ್ ಹೇಳಿದರು.
ತಾಲೂಕಿನ ದೊಡ್ಡಕಮರಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಭಾನುವಾರ 2006-07ನೇ ಸಾಲಿನ ವಿದ್ಯಾರ್ಥಿಗಳಿಂದ ಆಯೋಜಿಸಿದ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಶಿಕ್ಷಕರು ಕಲಿಸುವ ಪಾಠಗಳು ತರಗತಿಗೆ ಮಾತ್ರ ಸೀಮಿತವಾಗದೆ, ಜೀವನದ ಪ್ರತಿಯೊಂದು ಹಂತದಲ್ಲಿಯೂ ಮಾರ್ಗದರ್ಶನ ನೀಡುತ್ತಾರೆ. ಹಳೆಯ ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನು ಸ್ಮರಿಸಿ ಗುರುವಂದನಾ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಎಂದು ಹೇಳಿದರು
ಕಂಠನಹಳ್ಳಿ ಮಂಜುನಾಥ್ ಮಾತನಾಡಿ ವಿದ್ಯಾರ್ಥಿಗಳ ಬದುಕಿಗೆ ಉತ್ತಮ ದಿಕ್ಕು ತೋರಿಸುವಲ್ಲಿ ಶಿಕ್ಷಕರ ಕೊಡುಗೆ ಅಪಾರವಾಗಿದೆ. ಶಾಲಾ ದಿನಗಳಲ್ಲಿ ಶಿಕ್ಷಕರು ನೀಡಿದ ಮಾರ್ಗದರ್ಶನ ಹಾಗೂ ಪ್ರೋತ್ಸಾಹವನ್ನು ವಿದ್ಯಾರ್ಥಿಗಳು ಎಂದಿಗೂ ಮರೆಯಬಾರದು. ಹಲವು ವರ್ಷಗಳ ನಂತರ ಹಳೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಒಂದೆಡೆ ಸೇರಿರುವುದು ಸಂತಸದ ಸಂಗತಿ ಎಂದರು.
ಕಾರ್ಯಕ್ರಮದಲ್ಲಿ 2006-07ನೇ ಸಾಲಿನ ವಿದ್ಯಾರ್ಥಿಗಳು ಹಿರಿಯ ಶಿಕ್ಷಕರು ಹಾಗೂ ಗಣ್ಯರನ್ನು ಗೌರವಿಸಿ ಸನ್ಮಾನಿಸಿದರು. 2025-26ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಪ್ರಸ್ತುತ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ, ಸದಸ್ಯರಾದ ಅರುಣ್, ಯಶೋಧ, ಪುಟ್ಟಸ್ವಾಮಿ, ಕೃಷ್ಣೇಗೌಡ, ಮಂಜುನಾಥ್, ದಿನೇಶ್, ಮುಖ್ಯಶಿಕ್ಷಕ ಮಹದೇವ್, ಹಿರಿಯ ಶಿಕ್ಷಕರಾದ ಲೋಕನಾಥ, ಗೊರಹಳ್ಳಿ ಜಗದೀಶ್, ಸವಿತಾ, ರಾಘವೇಂದ್ರ, ಕಂಠನಹಳ್ಳಿ ಮಂಜುನಾಥ್, ಭುವನಹಳ್ಳಿ ಮಂಜುನಾಥ್, ಲೀಲಾವತಿ, ಸಿ.ಪಿ. ಮಂಜುನಾಥ್, ಮೂರ್ತಿ, ಸುನೀತಾ, ಅನಿತಾ, ನಂದಿನಿ, ನಜೇಯಭಾನು ಸೇರಿದಂತೆ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.