
ಮೈಸೂರು; ಉತ್ತಮ ಪುಸ್ತಕಗಳನ್ನು ಓದಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಮೈಸೂರು ವಿಶ್ವ ವಿದ್ಯಾನಿಲಯದ ನಿವೃತ್ತ ಗ್ರಂಥಪಾಲಕ ಡಾ.ಸಿ.ಪಿ.ರಾಮಶೇಷು ಹೇಳಿದರು.
ಮಂಗಳವಾರ ನಗರದ ಜೆಎಸ್ಎಸ್ ಮಹಿಳಾ ಕಾಲೇಜಿನ ಗ್ರಂಥಾಲಯದಲ್ಲಿ ಏರ್ಪಡಿಸಲಾಗಿದ್ದ ನವಕರ್ನಾಟಕ ಪ್ರಕಾಶನದ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪುಸ್ತಕಗಳು ನಮ್ಮ ಉತ್ತಮ ಸ್ನೇಹಿತರು, ಅವು ನಮಗೆ ಹೊಸ ವಿಚಾರಗಳನ್ನು ಪರಿಚಯಿಸುತ್ತವೆ ಮತ್ತು ನಮ್ಮ ಕಲ್ಪನಾ ಶಕ್ತಿಯನ್ನು ವಿಸ್ತರಿಸುತ್ತವೆ. ಒಳ್ಳೆಯ ಪುಸ್ತಕವನ್ನು ಓದುವುದರಿಂದ ನಮ್ಮ ಜ್ಞಾನ ಮಾತ್ರವಲ್ಲ, ನಮ್ಮ ವ್ಯಕ್ತಿತ್ವವೂ ಬೆಳೆಯುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ.ರೇಚಣ್ಣ ಮಾತನಾಡಿ, ಒಳ್ಳೆಯ ಪುಸ್ತಕಗಳು ಉತ್ತಮ ಸ್ನೇಹಿತರಂತೆ ಇವುಗಳಿಂದ ಸದಾ ಒಳಿತೆ ಆಗುತ್ತದೆ. ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಪುಸ್ತಕಗಳನ್ನು ಆಯ್ಕೆ ಮಾಡಿಕೊಂಡು ಓದುವ ಅಭ್ಯಾಸವನ್ನು ಹೆಚ್ಚಿಸಿಕೊಳ್ಳಲು ಇದು ಉತ್ತಮ ಅವಕಾಶವಾಗಿದೆ ಎಂದು ತಿಳಿಸಿದರು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗುರುಪಾದಸ್ವಾಮಿ, ಕಾಲೇಜಿನ ಗ್ರಂಥಪಾಲಕ ಹೆಚ್. ಎನ್. ಮಂಜುನಾಥ್ ಉಪಸ್ಥಿತರಿದ್ದರು. ಈ ಪುಸ್ತಕ ಪ್ರದರ್ಶನದಲ್ಲಿ ಕಾಲೇಜಿನ ಅಧ್ಯಾಪಕರು ಹಾಗೂ ವಿದ್ಯಾರ್ಥಿನಿಯರು ಉತ್ಸಾಹದಿಂದ ಭಾಗವಹಿಸಿ ಪುಸ್ತಕಗಳನ್ನು ವೀಕ್ಷಿಸಿದರು.