
ನಂಜನಗೂಡು; ಜಮೀನಿನ ಕೆಲಸಕ್ಕೆ ಬಂದಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಆದಿವಾಸಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ತಾಲೂಕಿನ ಬಂಕಹಳ್ಳಿ ಗ್ರಾಮದಲ್ಲಿ ಕೇಳಿಬಂದಿದೆ. ತಾಲೂಕಿನ ಡೋರನಕಟ್ಟೆಯ ಆದಿವಾಸಿ ಕಾಲೋನಿಯ ಮಹಿಳೆ ಗೋಪಿ ಅಲಿಯಾಸ್ ಗೌರಮ್ಮ (52). ಹಲ್ಲೆಗೊಳಗಾದ ಆದಿವಾಸಿ ಮಹಿಳೆ.
ಬಂಕಹಳ್ಳಿ ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರು ತಮ್ಮ ಜಮೀನಿನ ಕೆಲಸಕ್ಕೆ ಬಂದಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಆದಿವಾಸಿ ಮಹಿಳೆಯ ತಲೆಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ, ಹಲ್ಲೆಗೊಳಗಾಗಿ ತೀವ್ರವಾಗಿ ಕುಸಿದುಬಿದ್ದ ಗೌರಮ್ಮ ಹೆಚ್. ಡಿ ಕೋಟೆ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದಿದ್ದಾರೆ.
ಪ್ರಕರಣದ ಗಂಭೀರತೆಯನ್ನು ಅರಿತ ತಾಲೂಕು ಪರಿಶಿಷ್ಟ ಪಂಗಡಗಳ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ ವೇಳೆ ಹಲ್ಲೆ ನಡೆಸಿದ ಆರೋಪಿ ಪ್ರಕರಣವನ್ನು ಮುಚ್ಚಿ ಹಾಕಲು ತಂತ್ರ ನಡೆಸಿದ್ದಾನೆ ಎನ್ನಲಾಗಿದ್ದು, ಆದಿವಾಸಿ ಮಹಿಳೆಗೆ ಹಣದ ಆಮಿಷ ಹೊಡ್ಡಿ ಮಹಿಳೆ ಚರಂಡಿಗೆ ಬಿದ್ದು ಗಾಯಗೊಂಡಿರುದಾಗಿ ಸುಳ್ಳು ಹೇಳಿಕೆ ನೀಡಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಿ ಆದಿವಾಸಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಘಟನಾಕಾರರು ಮತ್ತು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.