
ಮೈಸೂರು: ಜಲಾಶಯಗಳಿಂದ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕೆಂದು ಕೆಪಿಸಿಸಿ ಕಾರ್ಯದರ್ಶಿ ವರುಣಾ ಮಹೇಶ್ ಅವರು ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೈಸೂರು ಜಿಲ್ಲೆಯಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಿದ್ದು, ಕೆರೆ-ಕಟ್ಟೆಗಳು ಬತ್ತಿ ಹೋಗುತ್ತಿರುವುದರಿಂದ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಬೋರ್ವೆಲ್ಗಳಲ್ಲಿ ಅಂತರ್ಜಲ ಮಟ್ಟವೂ ಕುಸಿಯುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಅಭಾವ ಉಂಟಾಗಿದೆ. ಈಗಾಗಲೇ ರೈತರು ಭತ್ತದ ಬೆಳೆ ಬೆಳೆಯಲು ಭೂಮಿಯನ್ನು ಸಿದ್ಧಪಡಿಸಿಕೊಂಡಿದ್ದು, ಕೃಷಿ ಚಟುವಟಿಕೆಗಳಿಗೆ ನೀರಿನ ಅಗತ್ಯ ಹೆಚ್ಚಾಗಿದೆ. ಆದ್ದರಿಂದ ಕಾವೇರಿ, ಕಬಿನಿ, ಹಾರಂಗಿ ಹಾಗೂ ತಾರಕ ಜಲಾಶಯಗಳಿಂದ ಸಂಬAಧಿಸಿದ ಕಾಲುವೆಗಳಿಗೆ ಕೂಡಲೇ ನೀರು ಹರಿಸಿ, ರೈತರಿಗೆ ಹಾಗೂ ಜಾನುವಾರುಗಳಿಗೆ ಅನುಕೂಲ ಕಲ್ಪಿಸಬೇಕು.
ನೀರಿನ ಸಮಸ್ಯೆ ಮತ್ತಷ್ಟು ತೀವ್ರಗೊಳ್ಳುವ ಮುನ್ನ ಸರ್ಕಾರ ತುರ್ತು ಕ್ರಮ ಕೈಗೊಂಡು ಜಿಲ್ಲೆಯ ನಾಲೆಗಳಿಗೆ ನೀರು ಹರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.