
ಮೈಸೂರು ; ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಮೈಸೂರು ಜಿಲ್ಲಾ ಘಟಕದ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವು ಟಿ. ನರಸೀಪುರ ಪುರಸಭೆಯಲ್ಲಿ ರಾಜ್ಯಾಧ್ಯಕ್ಷೆ ಶೈಲಾ ಕೆ.ಡಿ. ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷರಾಗಿ ಟಿ. ನರಸೀಪುರ ಪುರಸಭೆಯ ಮುಖ್ಯಾಧಿಕಾರಿ ಶ್ರೀನಿವಾಸ್ ಅವರನ್ನು ಆಯ್ಕೆ ಮಾಡಲಾಯಿತು. ಜಿಲ್ಲಾ ಕಾರ್ಯದರ್ಶಿಯಾಗಿ ಕಡಕೊಳ ಪಟ್ಟಣ ಪಂಚಾಯಿತಿಯ ಪ್ರಭಾರ ಆರೋಗ್ಯ ನಿರೀಕ್ಷಕ ಮಂಜುನಾಥ್ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಹೂಟಗಳ್ಳಿ ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಶಿವಪ್ರಸಾದ್ ಅವರನ್ನು ನೇಮಕ ಮಾಡಲಾಯಿತು.
ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ರಾಜ್ಯಾಧ್ಯಕ್ಷೆ ಶೈಲಾ ಕೆ.ಡಿ., ಪೌರ ಸೇವಾ ನೌಕರರ ಹಿತಾಸಕ್ತಿ ರಕ್ಷಣೆ, ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿ ಹಾಗೂ ಸಿಬ್ಬಂದಿ ಸಮಸ್ಯೆಗಳ ಪರಿಹಾರಕ್ಕೆ ಸಂಘವು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮೈಸೂರು ವಿಭಾಗ ಮಟ್ಟದ ಉಪಾಧ್ಯಕ್ಷ ಸತೀಶ್ ಮಡಿಕೇರಿ, ಸಂಘಟನಾ ಕಾರ್ಯದರ್ಶಿ ಗಣೇಶ್, ರಾಜ್ಯ ಪರಿಷತ್ ಸದಸ್ಯ ಗಿರೀಶ್ ಪೂವಯ್ಯ ಸೇರಿದಂತೆ ರಾಜ್ಯ ಮಟ್ಟದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು. ಅಲ್ಲದೆ ಮೈಸೂರು ವಿಭಾಗದ ವಿವಿಧ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೌರಕಾರ್ಮಿಕರು ಭಾಗವಹಿಸಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.